ಡಿಕೆ ಸರ್ಕಾರದ ಮತ್ತೊಂದು ವಿಕೆಟ್ ಪತನ? ರಾಜೀನಾಮೆಗೆ ನಿರ್ಧರಿಸಿದ್ರಾ ಕೆ.ಹೆಚ್.ಮುನಿಯಪ್ಪ?
"ಪಕ್ಷದಲ್ಲಿ ನಾನು ತಾಯಿ ಸ್ಥಾನದಲ್ಲಿದ್ದೇನೆ. ಎಲ್ಲ ಮಕ್ಕಳನ್ನೂ ಒಂದೇ ರೀತಿಯಲ್ಲಿ ನೋಡಬೇಕು. ಆದರೆ ಖಾತೆ ಹಂಚಿಕೆಯಲ್ಲಿ ಸಮತೋಲನ ಕಾಯ್ದುಕೊಂಡಿಲ್ಲ"
ರಾಜಕೀಯ
S3 Media House
6/5/20261 min read
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಖಾತೆ ಹಂಚಿಕೆ ವಿಚಾರದಲ್ಲಿ ಮತ್ತೊಮ್ಮೆ ಅಸಮಾಧಾನದ ಹೊಗೆ ಎದ್ದಿದೆ.
ದೇವನಹಳ್ಳಿಯಲ್ಲಿ ಮಾತನಾಡಿದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ, ಖಾತೆ ಹಂಚಿಕೆಯಲ್ಲಿ ಸೀನಿಯಾರಿಟಿಗೆ ಸೂಕ್ತ ಗೌರವ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
"ನಾನು ಎಂಟು ಬಾರಿ ಚುನಾಯಿತನಾಗಿದ್ದೇನೆ. ಆದರೆ ಖಾತೆ ಹಂಚಿಕೆಯಲ್ಲಿ ಸೀನಿಯಾರಿಟಿ ಮೇಂಟೇನ್ ಆಗಿಲ್ಲ" ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.
"ಪಕ್ಷದಲ್ಲಿ ನಾನು ತಾಯಿ ಸ್ಥಾನದಲ್ಲಿದ್ದೇನೆ. ಎಲ್ಲ ಮಕ್ಕಳನ್ನೂ ಒಂದೇ ರೀತಿಯಲ್ಲಿ ನೋಡಬೇಕು. ಆದರೆ ಖಾತೆ ಹಂಚಿಕೆಯಲ್ಲಿ ಸಮತೋಲನ ಕಾಯ್ದುಕೊಂಡಿಲ್ಲ" ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಇದೇ ರೀತಿ ಮುಂದುವರಿದರೆ 2028ರ ಚುನಾವಣೆಯಲ್ಲಿ ಪಕ್ಷಕ್ಕೆ ಕಷ್ಟವಾಗಬಹುದು ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ. ಈ ಕುರಿತು ಈಗಾಗಲೇ ಎಐಸಿಸಿ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ತಮ್ಮ ಅಭಿಪ್ರಾಯವನ್ನು ತಿಳಿಸಿರುವುದಾಗಿ ಮುನಿಯಪ್ಪ ಹೇಳಿದ್ದಾರೆ.
"ನನ್ನ ಖಾತೆಯನ್ನು ಬದಲಾವಣೆ ಮಾಡಿ ಜನಸೇವೆ ಮಾಡಲು ಇನ್ನಷ್ಟು ಅವಕಾಶ ಇರುವ ಖಾತೆಯನ್ನು ನೀಡುವಂತೆ ಮನವಿ ಮಾಡಿದ್ದೇನೆ. ಸಮಾಜ ಕಲ್ಯಾಣ ಅಥವಾ ಕೃಷಿ ಇಲಾಖೆಯಂತಹ ಖಾತೆ ನೀಡುವಂತೆ ಕೇಳಿದ್ದೆ" ಎಂದು ತಿಳಿಸಿದ್ದಾರೆ.
"ಈಗಾಗಲೇ ಮೂರು ವರ್ಷಗಳಿಂದ ಆಹಾರ ಇಲಾಖೆಯನ್ನು ನಿರ್ವಹಿಸಿದ್ದೇನೆ. ಪ್ರೋಟೋಕಾಲ್ ಪ್ರಕಾರ ಸೀನಿಯಾರಿಟಿ ಆಧಾರದ ಮೇಲೆ ಖಾತೆ ಹಂಚಿಕೆಯಾಗಬೇಕು" ಎಂದು ಒತ್ತಾಯಿಸಿದ್ದಾರೆ.
ಆದರೆ ಈ ವಿಚಾರದಲ್ಲಿ ಯಾವುದೇ ಗೊಂದಲ ಉಂಟಾಗಬಾರದು. ಪಕ್ಷದ ನಾಯಕರು ಪರಿಸ್ಥಿತಿಯನ್ನು ಸರಿಪಡಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.
ದೇವನಹಳ್ಳಿಯಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ನೀಡಿರುವ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಮುನಿಯಪ್ಪ ಕೂಡ ರಾಜೀನಾಮೆ ನೀಡ್ತಾರಾ ಅನ್ನೋ ಪ್ರಶ್ನೆ ಹುಟ್ಟಿಸಿದೆ.




