"ಇನ್ನು ಆಧಾರ್ ಬೇಡ... ಶಕ್ತಿ ಕಾರ್ಡ್ ಸಾಕು! ರಾಜ್ಯ ಸರ್ಕಾರದ ಹೊಸ ನಿರ್ಧಾರ"
LATEST NEWSಬೆಂಗಳೂರು
S3 Media House
6/9/20261 min read


ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಲ್ಲಿ ಮತ್ತೊಂದು ಮಹತ್ವದ ಬದಲಾವಣೆ ತರಲು ಸಿದ್ಧತೆ ನಡೆಯುತ್ತಿದೆ. ಮಹಿಳೆಯರ ಉಚಿತ ಬಸ್ ಪ್ರಯಾಣವನ್ನು ಇನ್ನಷ್ಟು ಸುಗಮಗೊಳಿಸುವ ಉದ್ದೇಶದಿಂದ ಶೀಘ್ರದಲ್ಲೇ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ಬರಲಿದೆ. ಹೊಸ ವ್ಯವಸ್ಥೆ ಜಾರಿಗೆ ಬಂದ ಬಳಿಕ ಬಸ್ ಪ್ರಯಾಣದ ವೇಳೆ ಮಹಿಳೆಯರು ಆಧಾರ್ ಕಾರ್ಡ್ ಅಥವಾ ಇತರೆ ಗುರುತಿನ ಚೀಟಿಗಳನ್ನು ತೋರಿಸುವ ಅಗತ್ಯ ಇರುವುದಿಲ್ಲ.
ರಾಜ್ಯದ ಮೂರು ಕೋಟಿಗೂ ಅಧಿಕ ಮಹಿಳಾ ಫಲಾನುಭವಿಗಳಿಗೆ ಉಚಿತವಾಗಿ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸಲು ಸರ್ಕಾರ ಯೋಜನೆ ರೂಪಿಸಿದೆ. ಇದರಿಂದ ಪ್ರತಿದಿನ ಬಸ್ಗಳಲ್ಲಿ ನಿರ್ವಾಹಕರಿಗೆ ಭೌತಿಕ ಗುರುತಿನ ಚೀಟಿ ತೋರಿಸುವ ಗೊಂದಲ ಹಾಗೂ ವಿಳಂಬಕ್ಕೂ ತೆರೆ ಬೀಳಲಿದೆ. ಸಾರಿಗೆ ಸಚಿವ ಬೈರತಿ ಸುರೇಶ್ ಅಧಿಕಾರ ಸ್ವೀಕರಿಸಿದ ಬಳಿಕ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚೆ ನಡೆಸಿದ್ದಾರೆ.
ಸಭೆಯ ಬಳಿಕ ಮಾತನಾಡಿದ ಅವರು, ಶಕ್ತಿ ಯೋಜನೆಯ ಫಲಾನುಭವಿಗಳಿಗೆ ಹೆಚ್ಚು ಅನುಕೂಲವಾಗುವಂತೆ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ. ಮಹಿಳೆಯರಿಗೆ ಈ ಸ್ಮಾರ್ಟ್ ಕಾರ್ಡ್ಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ. ಇದೇ ವೇಳೆ ಪುರುಷ ಪ್ರಯಾಣಿಕರೂ ಮೆಟ್ರೋ ಕಾರ್ಡ್ ಮಾದರಿಯಲ್ಲಿ ನಿಗದಿತ ಶುಲ್ಕ ಪಾವತಿಸಿ ಕಾರ್ಡ್ ಪಡೆಯಬಹುದಾಗಿದೆ.
ಕಾರ್ಡ್ನಲ್ಲಿರುವ ಮೊತ್ತ ಮುಗಿದ ಬಳಿಕ ಮರು ರೀಚಾರ್ಜ್ ಮಾಡಿಕೊಳ್ಳುವ ವ್ಯವಸ್ಥೆಯೂ ಲಭ್ಯವಿರಲಿದೆ. ಒಟ್ಟಾರೆ, ಶಕ್ತಿ ಯೋಜನೆಯನ್ನು ಮತ್ತಷ್ಟು ತಂತ್ರಜ್ಞಾನ ಸ್ನೇಹಿಯಾಗಿ ರೂಪಿಸುವ ದಿಸೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.


